ಉಡುಪಿ: ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಲು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ, ಬಿದುರು ರಹಿತ ದೂಪದಕಡ್ಡಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದರು.
ಅವರು ಶನಿವಾರ ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಐತಿಹಾಸಿಕ ಯೋಜನೆಗೆ ಚಾಲನೆ ನೀಡಲಾಗಿದೆ. ರಾಜ್ಯದ ಎಲ್ಲಾ ನಿಗಮಗಳ ಸಾರಿಗೆ ಬಸ್ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಜನರ ಕುಂದುಕೊರತೆಗಳಿಗೆ ಸ್ಪಂದಿಸಲು ‘ಪ್ರಜಾಸೇವಾ’ ಇಲಾಖೆ ಆರಂಭಿಸಲಾಗಿದ್ದು, ರಾಜ್ಯದ ವಿವಿಧ ಇಲಾಖೆಗಳ 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ.29ರಷ್ಟು ಮಳೆ ಕೊರತೆಯಾಗಿದ್ದು, ಕೃಷಿ, ಜಾನುವಾರು ಹಾಗೂ ಬರ ನಿರ್ವಹಣೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ₹40 ಲಕ್ಷ ಪರಿಹಾರ ನೀಡಲಾಗಿದೆ.
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 2,38,080 ಮಹಿಳೆಯರು ನೋಂದಣಿಯಾಗಿದ್ದು, 2,13,712 ಫಲಾನುಭವಿಗಳ ಖಾತೆಗಳಿಗೆ ₹1,366 ಕೋಟಿ ಜಮೆ ಮಾಡಲಾಗಿದೆ. ಶಕ್ತಿ ಯೋಜನೆಯಡಿ 4.58 ಕೋಟಿ ಮಹಿಳಾ ಪ್ರಯಾಣಿಕರು ಪ್ರಯೋಜನ ಪಡೆದಿದ್ದು, ಸರ್ಕಾರ ₹181.46 ಕೋಟಿ ವೆಚ್ಚ ಮಾಡಿದೆ.
ಗೃಹಜ್ಯೋತಿ ಯೋಜನೆಯಡಿ 3,31,311 ಗ್ರಾಹಕರು ನೋಂದಣಿಯಾಗಿದ್ದು, ಜೂನ್ 2026ರವರೆಗೆ ₹721.35 ಕೋಟಿ ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 8,23,787 ಫಲಾನುಭವಿಗಳಿದ್ದು, ಯುವನಿಧಿ ಯೋಜನೆಯಡಿ 4,600 ಅರ್ಹ ಫಲಾನುಭವಿಗಳಿಗೆ ₹12.88 ಕೋಟಿ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ.
2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಶೇ.99.58ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.96.43ರಷ್ಟು ಫಲಿತಾಂಶ ದಾಖಲಿಸಿ ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಜಿಲ್ಲೆಯಲ್ಲಿ 1.98 ಲಕ್ಷ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು, ಕಳೆದ ಸಾಲಿನಲ್ಲಿ 3,51,893 ಟನ್ ಮೀನು ಉತ್ಪಾದಿಸಲಾಗಿದೆ. ₹1,797 ಕೋಟಿ ಮೌಲ್ಯದ ಮೀನು ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ.
ಜಲಜೀವನ್ ಮಿಷನ್ ಅಡಿ ಜಿಲ್ಲೆಯ 2.47 ಲಕ್ಷ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ₹734.02 ಕೋಟಿ ವೆಚ್ಚದಲ್ಲಿ 525 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 487 ಕಾಮಗಾರಿಗಳು ಪೂರ್ಣಗೊಂಡಿವೆ.
ರೈತರಿಗೆ ಬೆಳೆ ವಿಮೆ, ಕೃಷಿ ಯಾಂತ್ರೀಕರಣ, ತೋಟಗಾರಿಕೆ, ಸೂಕ್ಷ್ಮ ನೀರಾವರಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಸಹಾಯಧನ ಒದಗಿಸಲಾಗುತ್ತಿದೆ.
ರಾಜ್ಯದ ಆರೋಗ್ಯ ಇಲಾಖೆಯ ವೈದ್ಯರ ಕೊರತೆ ನೀಗಿಸಲು 200 ವೈದ್ಯರನ್ನು ನೇರ ನೇಮಕಾತಿ ಮೂಲಕ ಹಾಗೂ 1,000 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲು ಕ್ರಮ ಕೈಗೊಳ್ಳಲಾಗಿದೆ. ತುರ್ತು ಸೇವೆಗಳಿಗೆ ಕೇಂದ್ರೀಕೃತ 108 ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲಾಗಿದ್ದು, 100 ಬೈಕ್ ಆಂಬ್ಯುಲೆನ್ಸ್ಗಳನ್ನು ನಿಯೋಜಿಸಲಾಗುತ್ತಿದೆ.
ಯುವ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದ್ದು, ‘ಯುವ ಕರ್ನಾಟಕ–ನವ ಭಾರತ’ ಘೋಷವಾಕ್ಯದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತ್ತಿದೆ. ಗ್ರಾಮೀಣ ಬದುಕಿನ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡಲು ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಕಸ ವಿಲೇವಾರಿಗೆ ‘ಉಡುಪಿ ಸಿವಿಕ್ ವಾಚ್’ ಆಪ್ ಅಭಿವೃದ್ಧಿಪಡಿಸಲಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಉದ್ದೇಶವಿದೆ.
ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸ್ಥಳೀಯ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಜೀವನಶೈಲಿಯನ್ನು ಪ್ರತಿಬಿಂಬಿಸುವ ಮ್ಯಾಸ್ಕಾಟ್ ಆಯ್ಕೆ ಮಾಡಲಾಗಿದ್ದು, ಸ್ಪರ್ಧೆಯಲ್ಲಿ ಸಲ್ಲಿಕೆಯಾದ 2,838 ಚಿತ್ರಗಳ ಪೈಕಿ ಆಯ್ದ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಹಾದಿಯಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಜನರಿಗೆ ತಲುಪಿಸುವ ಹೊಣೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮೇಲಿದೆ ಎಂದು ತಿಳಿಸಲಾಗಿದೆ.
ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಲು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ, ಬಿದುರು ರಹಿತ ದೂಪದಕಡ್ಡಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಕಾಲ್ಪನಿಕ ಮಾಸ್ಕಾಟ್ನ್ನು ಅನಾವರಣಗೊಳಿಸಿದ ಸಚಿವರು, ಉಡುಪಿ ಸುಗಂಧವನ್ನು ಬಿಡುಗಡೆಗೊಳಿಸಿದರು.
ಶಾಸಕ ಯಶಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ಭಂಡಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಎಸ್ಪಿ ಹರಿರಾಂ ಶಂಕರ್, ಸಿಇಒ ಪ್ರತೀಕ್ ಬಾಯಲ್ ಮುಂತಾದವರು ಉಪಸ್ಥಿತರಿದ್ದರು.
ಇದಕ್ಕೆ ಮುನ್ನ ಆಕರ್ಷಕ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲೆಯ ಸಾಧಕರನ್ನು ಸನ್ಮಾನಿಸಿ ಕೊನೆಯಲ್ಲಿ ಉಡುಪಿ ಆಸುಪಾಸಿನ ಶಾಲಾ ವಿದ್ಯಾರ್ಥಿಗಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದರು.




