ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಖಂಡನೀಯ ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇಡೀ ದೇಶದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಸ್ವರೂಪ ಪಡೆದು ವಿದ್ಯಾರ್ಥಿಗಳು ಲಕ್ಷ ಲಕ್ಷ ಸಂಖ್ಯೆಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೊನೆಗೂ ಸಿಜೆಪಿ ನೇತೃತ್ವದ ವಿದ್ಯಾರ್ಥಿ ಸಮೂಹ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಇಷ್ಟೇ ಅಲ್ಲ ನೀಟ್ ಅವ್ಯವಸ್ಥೆಯನ್ನು ಒಪ್ಪಿಕೊಂಡ ಮೋದಿ ನೇತೃತ್ವದ ಸರಕಾರ ಸಾಕಷ್ಟು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮುಂದಿನ ದಿನಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಾಗಿ ಕಟ್ಟುನಿಟ್ಟಿನ ಕಾಯ್ದೆಯನ್ನು ಕೂಡ ಸಂಸತ್ ನಲ್ಲಿ ಜಾರಿಗೆ ತಂದಿದೆ.
ವಿಪರ್ಯಾಸದ ಸಂಗತಿ ಎಂದರೆ ಇಷ್ಟೆಲ್ಲ ಬೆಳವಣಿಗೆಗಳು ಉಡುಪಿ ಬಿಜೆಪಿಯ ನಾಯಕರಿಗೆ ತಿಳಿದಂತಿಲ್ಲ.ಎನ್.ಡಿಎ ಸರ್ಕಾರವೇ ತನ್ನ ತಪ್ಪನ್ನು ಅರಿತು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾಯ್ದೆ ತಂದಿದ್ದರೂ ಉಡುಪಿ ಬಿಜೆಪಿ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಂದು ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕರು ಸಹಿತ ಜಿಲ್ಲೆಯ ಶಾಸಕರು ಅಸಂಬದ್ಧವಾಗಿ ಮಾತನಾಡಿದ್ದಾರೆ. ಇಡೀ ವಿದ್ಯಾರ್ಥಿ ಸಮೂಹವನ್ನು ನಿಂದಿಸಿದ್ದಾರೆ. ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಎಂಬಂತೆ ಬಿಂಬಿಸಿದ್ದಾರೆ. ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಹೀಯಾಳಿಸಿದ್ದಾರೆ.ಇದು ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ.ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ,ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಬಗ್ಗೆಯೂ ಪ್ರತಿಭಟನೆಯಲ್ಲಿ ಹಗುರವಾಗಿ ಮಾತನಾಡಿದ್ದು ಖಂಡನೀಯ.ಪ್ರತಿಭಟನೆ ನಡೆಸಿ ಶಿಕ್ಷಣ ಮಂತ್ರಿಯ ರಾಜೀನಾಮೆ ಪಡೆದಿದ್ದ ಇಡೀ ವಿದ್ಯಾರ್ಥಿ ಸಮೂಹವನ್ನು ದೇಶದ್ರೋಹಿಗಳು , ಭಯೋತ್ಪಾದಕರು ಎಂಬಂತೆ ಬಿಂಬಿಸಿದ್ದು ಖಂಡನೀಯ. ಈ ಕುರಿತ ವಿಡಿಯೋ ಸಾಕ್ಷ್ಯಗಳನ್ನು ಸಂಗ್ರಹಿಸಿ ಮುಂದಿನ ದಿನಗಳಲ್ಲಿ ಬಿಜೆಪಿ ನಾಯಕರ ವಿರುದ್ದ ದೂರು ನೀಡಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.




