Thursday, July 2, 2026

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ,ಉಡುಪಿ : 2025-26 ನೇ ಸಾಲಿನಲ್ಲಿ 26.72 ಕೋಟಿ ಲಾಭ : ಯಶ್ಪಾಲ್ ಎ. ಸುವರ್ಣ

ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2025-26ನೇ ಸಾಲಿನಲ್ಲಿ ರೂ. 1212 ಕೋಟಿ ವ್ಯವಹಾರ ನಡೆಸಿ ರೂ. 26.72 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು 50,000 ಗ್ರಾಹಕರನ್ನು ಹೊಂದಿದೆ. ಬ್ಯಾಂಕ್ 2025-26ನೇ ಸಾಲಿನಲ್ಲಿ ರೂ. 715 ಕೋಟಿ ಠೇವಣಿ, ರೂ.497 ಕೋಟಿ ಸಾಲ ಮತ್ತು ಮುಂಗಡ, ರೂ. 46 ಕೋಟಿ ಪಾಲು ಬಂಡವಾಳ ಹೊಂದಿದ್ದು ರೂ. 850 ಕೋಟಿ ದುಡಿಯುವ ಬಂಡವಾಳದೊಂದಿಗೆ ಉತ್ತಮ ಪ್ರಗತಿ ಸಾಧಿಸಿದೆ. ಪ್ರಸ್ತುತ ರೂ.750 ಕೋಟಿ ಠೇವಣಿ ಹಾಗೂ ರೂ. 551 ಕೋಟಿ ಸಾಲ ಮತ್ತು ಮುಂಗಡವನ್ನು ಹೊಂದಿದೆ.

ಕಳೆದ 16 ವರ್ಷಗಳಿಂದ ನಿರಂತರವಾಗಿ ಸದಸ್ಯ ಗ್ರಾಹಕರಿಗೆ ಅತೀ ಹೆಚ್ಚು ಡಿವಿಡೆಂಡ್ ನೀಡುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿಯನ್ನು ಪಡೆದು ಸತತವಾಗಿ 8 ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನೀಡುವ ಪ್ರತಿಷ್ಠಿತ ಪ್ರಶಸ್ತಿ “ಸಾಧನ ಪ್ರಶಸ್ತಿ”ಯನ್ನು ಮುಡಿಗೇರಿಸಿಕೊಂಡಿದೆ.

ಪ್ರಸ್ತುತ ಬ್ಯಾಂಕಿನ ವ್ಯವಹಾರ ಕ್ಷೇತ್ರವು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ ಜಿಲ್ಲೆಯನ್ನು ಒಳಗೊಂಡಿದ್ದು, ಮುಂಬರುವ ದಿನಗಳಲ್ಲಿ ಕರ್ನಾಟಕದಾದ್ಯಂತ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ವಿಸ್ತರಿಸಲು ಯೋಜನೆ ರೂಪಿಸಲಾಗಿದೆ.

ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸುಮಾರು 7 ಕೋಟಿ ವೆಚ್ಚದ ಸುಸಜ್ಜಿತ ಸ್ವಂತ ಕಟ್ಟಡಕ್ಕೆ ಉಡುಪಿ ಶಾಖೆಯು ಶೀಘ್ರದಲ್ಲಿಯೇ ಸ್ಥಳಾಂತರಗೊಳ್ಳಲಿದೆ ಹಾಗೂ ಗಂಗೊಳ್ಳಿ ಶಾಖೆಯು ಕೂಡ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ. 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿರುವ ಬ್ಯಾಂಕಿನ ಆಡಳಿತ ಕಛೇರಿ ಹಾಗೂ 7 ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.
ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿ ಸಮನಾಗಿ ಆಧುನಿಕ ಬ್ಯಾಂಕಿಂಗ್ ಸೇವೆಯ ಮೂಲಕ ಗ್ರಾಹಕ ಸ್ನೇಹಿಯಾಗಿ ಬೆಳೆಯುತ್ತಿರುವ ಬ್ಯಾಂಕ್ ಸುವರ್ಣ ಮಹೋತ್ಸವ ಹೊಸ್ತಿಲಿನಲ್ಲಿ IಈSಅ ಕೋಡ್ ಹೊಂದುವ ಮೂಲಕ ಕರಾವಳಿ ಭಾಗದ ಪ್ರಪ್ರಥಮ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವತಿಯಿಂದ 2 ಸಾವಿರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ರೂ. 50 ಲಕ್ಷ ವೆಚ್ಚದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಲಾಗಿದ್ದು, ಉಚ್ಚಿಲ ದಸರಾ ಮಹೋತ್ಸವದ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ತೃತೀಯ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಪೊಣ್ಣು ಪಿಲಿ ನಲಿಕೆ ಸಾಂಸ್ಕೃತಿಕ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದು ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುವ ಮೂಲಕ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ.

“ಸುವರ್ಣ ಮಹೋತ್ಸವದ ಧ್ಯೇಯ”

ಸುವರ್ಣ ಮಹೋತ್ಸವ ಪೂರೈಸುವ ಸಂದರ್ಭದಲ್ಲಿ 1 ಲಕ್ಷ ಗ್ರಾಹಕರನ್ನೊಳಗೊಂಡು, ಒಂದು ಸಾವಿರ ಕೋಟಿ ಠೇವಣಿ ಸಂಗ್ರಹಣೆ ಗುರಿಯನ್ನು ಆಡಳಿತ ಮಂಡಲಿ ಹೊಂದಿದೆ. ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನೆಲೆಯಲ್ಲಿ ಉದ್ಯೋಗ ಮೇಳ, ಸಹಕಾರಿ-ಸಂಘ ಸಂಸ್ಥೆಗಳ ಸಿಬ್ಬಂದಿಯವರಿಗೆ ಕ್ರೀಡಾಕೂಟ, ಹೊಸ ಶಾಖೆ ಆರಂಭ ಹಾಗೂ ಆಶಕ್ತ ಕುಟುಂಬಗಳಿಗೆ ಮನೆ ನಿರ್ಮಾಣದ ಯೋಜನೆಯ ಮೂಲಕ ಮಾದರಿ ಕಾರ್ಯಕ್ರಮ ಮಾಡುವ ಯೋಜನೆ ಆಡಳಿತ ಮಂಡಳಿಯ ಮುಂದಿದೆ.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಹಕರಿಸಿದ ಸರ್ವರಿಗೂ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಬ್ಯಾಂಕಿನ ಪ್ರಗತಿಗೆ ಸರ್ವರ ಸಲಹೆ ಸಹಕಾರವನ್ನು ಯಾಚಿಸುವುದಾಗಿ ಅಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More like this
Related

ಕಥೊಲಿಕ್ ಸಭಾದಿಂದ ಸಿಎಂ ಡಿ ಕೆ ಶಿವಕುಮಾರ್ ಭೇಟಿ; ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಮನವಿ

ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ ಮಂಗಳೂರು ಪ್ರದೇಶ ವತಿಯಿಂದ ನೂತನವಾಗಿ...

ಧ್ವನಿ ಬೆಳಕು ಸಂಯೋಜಕರ ಸಂಘಟನೆ ಉಡುಪಿ ವಲಯ ವಾರ್ಷಿಕ ಮಹಾಸಭೆ

ಉಡುಪಿ: ಧ್ವನಿ ಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಉಡುಪಿ...

ಎಂಎಲ್‌ಸಿ ಚುನಾವಣೆಯ ಅಡ್ಡಮತದಾನ ವಿವಾದ ಈಗ ಮುಗಿದ ಅಧ್ಯಾಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಮೈಸೂರು: ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ (ಕ್ರಾಸ್‌ ವೋಟಿಂಗ್)...

Copying is disabled on Udupi Digital News.