Monday, September 14, 2026

ಮುದರಂಗಡಿ ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆ.7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಮೋಟಾರ್ ಸೈಕಲ್ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅಲಿಯಾಸ್ ದೀಪಕ್ ಅವರನ್ನು ಈಗಾಗಲೇ ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿತ್ತು. ಆರೋಪಿಗಳ ಬ್ಯಾಂಕ್ ಖಾತೆ ವಿವರ, ಮೊಬೈಲ್ ಹಾಗೂ ಕರೆ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಮೊಹಮ್ಮದ್ ಇರ್ಷಾದ್ ಹಾಗೂ ಚಿರಾಗ್ ಪೂಜಾರಿ ಎಂಬವರು ಆರೋಪಿಗಳಿಗೆ ಹಣ ಜಮೆ ಮಾಡಿ ಕೃತ್ಯಕ್ಕೆ ಸಹಕರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮುಂದುವರಿದ ತನಿಖೆಯಲ್ಲಿ ಆರೋಪಿಗಳ ಬ್ಯಾಂಕ್ ವಹಿವಾಟು, ಮೊಬೈಲ್ ಕರೆ ವಿವರಗಳು ಹಾಗೂ ಚಲನವಲನಗಳ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಕೊಲೆಗೆ ಅಪರಾಧಿಕ ಒಳಸಂಚು ರೂಪಿಸಿ ಕೃತ್ಯಕ್ಕೆ ಹಣಕಾಸಿನ ನೆರವು ನೀಡಿದ ಆರೋಪದಡಿ ಸದಾನಂದ ದೇವಾಡಿಗ ಅಲಿಯಾಸ್ ಸದಾನಂದ ಎ. (41) ಹಾಗೂ ಕಿಶೋರ್ ರಾಮ ಪೂಜಾರಿ (47) ಅವರನ್ನು ಬಂಧಿಸಲಾಗಿದೆ.

ಆದಮಾರು ಮಠದ ಬಳಿ ವಾಸವಾಗಿರುವ ಸದಾನಂದ ದೇವಾಡಿಗನಿಂದ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್ಗಳು, ಒಂದು ಮೋಟಾರ್ ಸೈಕಲ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಉಚ್ಚಿಲ ಬಡಾ ಗ್ರಾಮದ ನಿವಾಸಿ ಕಿಶೋರ್ ರಾಮ ಪೂಜಾರಿಯಿಂದ ಮೂರು ಮೊಬೈಲ್ ಫೋನ್ಗಳು ಹಾಗೂ ಒಂದು ಕ್ರೇಟಾ ಕಾರು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ನೇರ ಆರೋಪಿ ರಾಜು, ಬೈಂದೂರು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ಗಾಯಗೊಂಡಿದ್ದು, ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

Copying is disabled on Udupi Digital News.