ತಿರುವನಂತಪುರಂ/ವಯನಾಡ್: ವಯನಾಡಿನ ಅನಕ್ಕಾಂಪೊಯಿಲ್–ಕಲ್ಲಾಡಿ ಸುರಂಗ ರಸ್ತೆ ಯೋಜನೆಯ ಕಾಮಗಾರಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭೀಕರ ಮಣ್ಣಿನ ಕುಸಿತದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಇನ್ನೂ ಏಳು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಮುಂದುವರಿದಿದೆ ಎಂದು ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಮೃತರು, ಗಾಯಾಳುಗಳು ಮತ್ತು ನಾಪತ್ತೆಯಾದವರು ಎಲ್ಲರೂ ಯೋಜನೆಯ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಾಗಿದ್ದಾರೆ.
ಕಲ್ಲಾಡಿಯ ಮೀನಾಕ್ಷಿ ಸೇತುವೆ ಸಮೀಪ ಸುರಂಗ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಕಾಮಗಾರಿಯಿಂದ ಹೊರತೆಗೆದಿದ್ದ ಭಾರಿ ಪ್ರಮಾಣದ ಮಣ್ಣಿನ ರಾಶಿ ಕುಸಿದು ಕೆಲಸದ ಪ್ರದೇಶವನ್ನು ಮುಚ್ಚಿಹಾಕಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಮೆಪ್ಪಾಡಿ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 226 ಮಿ.ಮೀ. ಮಳೆಯಾಗಿದ್ದು, ಇದೇ ಮಣ್ಣು ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ಘಟನಾ ಸ್ಥಳವು ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು, ಹಲವು ಖಾಸಗಿ ವಾಹನಗಳು ಹಾಗೂ ಕಾರ್ಮಿಕರನ್ನು ಸಾಗಿಸುವ ಬಸ್ ಕೂಡ ಅಲ್ಲಿ ನಿಲ್ಲಿಸಲಾಗಿತ್ತು. ಮಣ್ಣಿನಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯಿದೆ ಎಂದು ರಕ್ಷಣಾ ಸಿಬ್ಬಂದಿ ಶಂಕಿಸಿದ್ದಾರೆ.
ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಕಚೇರಿಯಲ್ಲಿ ತುರ್ತು ಸಭೆ ನಡೆಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸತೀಶನ್, “ಈವರೆಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಒಬ್ಬರು ಮೃತಪಟ್ಟಿದ್ದಾರೆ, ಏಳು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ. ಭಾರೀ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ,” ಎಂದು ಹೇಳಿದರು.
ಮುಖ್ಯಮಂತ್ರಿಗಳು ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದು, ಕಾಮಗಾರಿ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ಭಾರೀ ಪ್ರಮಾಣದ ಮಣ್ಣನ್ನು ತೆರವುಗೊಳಿಸುವಂತೆ ಸರ್ಕಾರವು ನಿರ್ಮಾಣ ಕಂಪನಿಗೆ ಹಲವು ಬಾರಿ ಸೂಚನೆ ನೀಡಿತ್ತು ಎಂದು ಹೇಳಿದ್ದಾರೆ.
ಜೂನ್ 20ರಂದು ಈ ಕುರಿತು ಅಧಿಕೃತ ಆದೇಶವನ್ನೂ ಹೊರಡಿಸಲಾಗಿತ್ತು. ಆದರೆ, ಕಂಪನಿ ಅದನ್ನು ಪಾಲಿಸಿಲ್ಲ ಎಂದು ಅವರು ತಿಳಿಸಿದರು.
“ಯಾವುದೇ ಯೋಜನೆ ಜಾರಿಯಾಗುವ ವೇಳೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂತಹ ಘಟನೆ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ,” ಎಂದು ಸತೀಶನ್ ಹೇಳಿದ್ದಾರೆ.
ರಾಜ್ಯ ಕಂದಾಯ ಸಚಿವ ಎ.ಪಿ. ಅನಿಲ್ ಕುಮಾರ್ ಹಾಗೂ ಕೃಷಿ ಸಚಿವ ಟಿ. ಸಿದ್ದೀಕ್ ಅವರನ್ನು ತಕ್ಷಣ ವಯನಾಡ್ಗೆ ತೆರಳಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಘಟನಾ ಸ್ಥಳಕ್ಕೆ ತೆರಳುವ ಮುನ್ನ ಮಾತನಾಡಿದ ಸಚಿವ ಟಿ. ಸಿದ್ದೀಕ್, ಸುರಂಗ ಕಾಮಗಾರಿಯಿಂದ ಹೊರತೆಗೆದ ಮಣ್ಣನ್ನು ವೈಜ್ಞಾನಿಕವಲ್ಲದ ರೀತಿಯಲ್ಲಿ ಸಂಗ್ರಹಿಸಿರುವುದೇ ದುರಂತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತಿದೆ ಎಂದರು.
“ಕಾಮಗಾರಿ ಪ್ರದೇಶದಲ್ಲಿ ಮಣ್ಣು ಸಂಗ್ರಹಿಸಿದ ವಿಧಾನವೇ ಈ ದುರಂತಕ್ಕೆ ಕಾರಣವಾಗಿದೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ. ಎರಡು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಆಗಮಿಸುತ್ತಿದ್ದು, ಅಗ್ನಿಶಾಮಕ ದಳ ಈಗಾಗಲೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ,” ಎಂದು ಅವರು ಹೇಳಿದರು.
“ಇದು ಪ್ರಕೃತಿ ವಿಕೋಪವಲ್ಲ, ಮಾನವ ನಿರ್ಮಿತ ದುರಂತ,” ಎಂದು ಸಿದ್ದೀಕ್ ಅಭಿಪ್ರಾಯಪಟ್ಟರು. ಈ ಕುರಿತು ಹಿಂದೆ ವ್ಯಕ್ತವಾಗಿದ್ದ ಆತಂಕಗಳ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತೇ ಎಂಬುದನ್ನು ಸರ್ಕಾರ ಪರಿಶೀಲಿಸಲಿದೆ ಎಂದರು.
ಭಾರೀ ಮಳೆ ತಕ್ಷಣದ ಕಾರಣವಾಗಿದ್ದರೂ, ಕಾಮಗಾರಿ ಪ್ರದೇಶದಲ್ಲಿ ಮಣ್ಣಿನ ರಾಶಿಯನ್ನು ಅಸುರಕ್ಷಿತವಾಗಿ ಸಂಗ್ರಹಿಸಿರುವುದು ಹಾಗೂ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯವೇ ದುರಂತಕ್ಕೆ ಪ್ರಮುಖ ಕಾರಣವೇ ಎಂಬುದರ ಕುರಿತು ತನಿಖೆ ನಡೆಯಲಿದೆ.
ಈ ನಡುವೆ, ವಯನಾಡ್ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ.
Caption:




