ನವದೆಹಲಿ:ಉತ್ತರ–ಪಶ್ಚಿಮ ದೆಹಲಿಯ ಜಹಾಂಗೀರ್ಪುರಿ ಬಸ್ ನಿಲ್ದಾಣದ ಸಮೀಪ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ 29 ವರ್ಷದ ಸ್ಕೂಟಿ ಸವಾರ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮರ್ಸಿಡಿಸ್ ಕಾರಿನ ಚಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 5ರಂದು ಜಹಾಂಗೀರ್ಪುರಿ ಬಸ್ ನಿಲ್ದಾಣದ ಸಮೀಪದ ಫುಟ್ ಓವರ್ ಬ್ರಿಡ್ಜ್ ಬಳಿ, ಜಿಟಿಕೆ ಬೈಪಾಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಕೂಟಿ ಸವಾರನನ್ನು ಬಾಬು ಜಗಜೀವನ್ ರಾಮ್ ಮೆಮೋರಿಯಲ್ (ಬಿಜೆಆರ್ಎಂ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಆತನನ್ನು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ಘೋಷಿಸಿದರು.
ಮೃತರನ್ನು ದೆಹಲಿಯ ಮಂಗೋಲ್ಪುರಿ ನಿವಾಸಿ ದೀಪಕ್ (29) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಅಪಘಾತದ ಬಳಿಕ ಪಿಸಿಆರ್ಗೆ ಕರೆ ಮಾಡಿದ ವ್ಯಕ್ತಿಯೊಬ್ಬರು HR-51BT-6304 ನೋಂದಣಿ ಸಂಖ್ಯೆಯ ಮರ್ಸಿಡಿಸ್ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎಂದು ಮಾಹಿತಿ ನೀಡಿದ್ದರು.
ತನಿಖೆ ವೇಳೆ ವಾಹನವನ್ನು ಪತ್ತೆಹಚ್ಚಿದ ಪೊಲೀಸರು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 133ರ ಅಡಿಯಲ್ಲಿ ನೋಂದಾಯಿತ ವಾಹನ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿದರು. ವಿಚಾರಣೆಯಲ್ಲಿ ಅಪಘಾತದ ವೇಳೆ ಕಾರನ್ನು ಅನ್ಶ್ ಪ್ರತಾಪ್ ಸಿಂಗ್ ಚಾಲನೆ ಮಾಡುತ್ತಿದ್ದುದಾಗಿ ತಿಳಿದುಬಂದಿತು.
ಈ ಹಿನ್ನೆಲೆಯಲ್ಲಿ ಜಹಾಂಗೀರ್ಪುರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಂಖ್ಯೆ 436/2026 ದಾಖಲಿಸಿ, ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 281 (ಅಜಾಗರೂಕ ಚಾಲನೆ) ಹಾಗೂ 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಅಪಘಾತಕ್ಕೆ ಕಾರಣವಾದ ಸಂದರ್ಭಗಳನ್ನು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಸೇರಿದಂತೆ ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ.
ಪ್ರತ್ಯಕ್ಷದರ್ಶಿಯೊಬ್ಬರು ನೀಡಿದ ವಾಹನದ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಮರ್ಸಿಡಿಸ್ ಕಾರನ್ನು ಪತ್ತೆಹಚ್ಚಿ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದನೆಯೇ ಅಥವಾ ಆತನ ವಿರುದ್ಧ ಇನ್ನೂ ಹೆಚ್ಚಿನ ಆರೋಪಗಳನ್ನು ಸೇರಿಸಲಾಗುತ್ತದೆಯೇ ಎಂಬ ಕುರಿತು ತನಿಖೆ ಮುಂದುವರಿದಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಹಿರಂಗಪಡಿಸಲಾಗಿಲ್ಲ.




