Sunday, May 10, 2026

ಕರ್ನಾಟಕ ಸಚಿವ ಡಿ. ಸುಧಾಕರ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ:

ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಅಂಕಿಅಂಶ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರನ್ನು “ಕಾಂಗ್ರೆಸ್ ತತ್ವದ ಧ್ವಜವಾಹಕ” ಎಂದು ಬಣ್ಣಿಸಿದ ರಾಹುಲ್ ಗಾಂಧಿ, ಚಿತ್ರದುರ್ಗ ಮತ್ತು ಕರ್ನಾಟಕದ ಬಡಜನರ ಸೇವೆಗೆ ಅವರು ಜೀವನವನ್ನೇ ಸಮರ್ಪಿಸಿದ್ದರು ಎಂದು ಸ್ಮರಿಸಿದರು.

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಭಾನುವಾರ ಮುಂಜಾನೆ 3.15ಕ್ಕೆ ನಿಧನರಾದರು ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.

ಅವರಿಗೆ ಪತ್ನಿ ಹರ್ಷಿಣಿ, ಪುತ್ರ ಸುಹಾಸ್ ಹಾಗೂ ಪುತ್ರಿ ಸ್ಪೂರ್ತಿ ಇದ್ದಾರೆ. ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ ರಾಹುಲ್ ಗಾಂಧಿ, “ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕರ್ನಾಟಕ ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕಾಂಗ್ರೆಸ್ ತತ್ವದ ನಿಜವಾದ ಧ್ವಜವಾಹಕರಾಗಿದ್ದ ಅವರು ಚಿತ್ರದುರ್ಗ ಮತ್ತು ಕರ್ನಾಟಕದ ಬಡಜನರ ಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ನನ್ನ ಸಂತಾಪಗಳು,” ಎಂದು ಬರೆದಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿದ್ದ ಸುಧಾಕರ್ ಅವರು ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಶ್ವಾಸಕೋಶ ಪ್ರತಿರೋಪಣೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆ ಅವರು ನಿಧನರಾದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಮೂಲದವರಾದ ಸುಧಾಕರ್ ಜೈನ ಸಮುದಾಯಕ್ಕೆ ಸೇರಿದವರಾಗಿದ್ದರು. 1961ರ ಮಾರ್ಚ್ 28ರಂದು ದಶರಥಯ್ಯ ಹಾಗೂ ಕಂಚನಮಾಲ ದಂಪತಿಗೆ ಜನಿಸಿದ್ದ ಅವರು ಬಿ.ಕಾಂ ಪದವಿ ಪಡೆದ ಬಳಿಕ ರಾಜಕೀಯಕ್ಕೆ ಪ್ರವೇಶಿಸಿದ್ದರು.

ಪ್ರಸ್ತುತ ಹಿರೀಯೂರು ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಅವರು ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. 2004ರಲ್ಲಿ ಚಳ್ಳಕೆರೆ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಚಳ್ಳಕೆರೆ ಕ್ಷೇತ್ರ ಮೀಸಲು ಕ್ಷೇತ್ರವಾಗುತ್ತಿದ್ದಂತೆ 2008ರಲ್ಲಿ ಹಿರೀಯೂರಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು.

2008ರಲ್ಲಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಸುಧಾಕರ್, ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ನಂತರ ಬೇಗರ್ಸ್ ಕಾಲೋನಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಖಾತೆ ಕಳೆದುಕೊಂಡು ಮುಜರಾಯಿ ಸಚಿವರಾಗಿ ನೇಮಕಗೊಂಡಿದ್ದರು.

2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರೀಯೂರಿನಿಂದ ಗೆದ್ದ ಅವರು, 2018ರಲ್ಲಿ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು ಅನುಭವಿಸಿದ್ದರು. ಆದರೆ 2023ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಬರಗಾಲದ ಸಂದರ್ಭದಲ್ಲಿ ಹಿರೀಯೂರಿನ ಕೆರೆಗಳ ಸುತ್ತ ಮೇವು ಬೆಳೆಸಿ ರೈತರ ಜಾನುವಾರುಗಳಿಗೆ ವಿತರಿಸಿದ್ದ ಅವರ ಸೇವೆ ಇಂದಿಗೂ ಜನರ ನೆನಪಿನಲ್ಲಿ ಉಳಿದಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿ, “ನಮ್ಮ ಸಂಪುಟದ ಸಹೋದ್ಯೋಗಿ ಹಾಗೂ ಆತ್ಮೀಯರಾದ ಡಿ. ಸುಧಾಕರ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಪರಿಣಾಮಕಾರಿ ಸಾರ್ವಜನಿಕ ಸೇವೆ ಸಲ್ಲಿಸಿದ್ದರು,” ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕೂಡ ಸಂತಾಪ ಸೂಚಿಸಿ, “ಯೋಜನೆ ಮತ್ತು ಅಂಕಿಅಂಶ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನ ದುಃಖಕರ. ಭಗವಂತರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ,” ಎಂದು ತಿಳಿಸಿದ್ದಾರೆ.

More like this
Related

ತಮಿಳುನಾಡಿನ ಹೊಸ ಸಿಎಂ ವಿಜಯ್‌ಗೆ ಶ್ರೀಲಂಕಾ ಅಧ್ಯಕ್ಷ ದಿಸಾನಾಯಕೆ ಅಭಿನಂದನೆ

ಕೊಲಂಬೊ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಹಾಗೂ ನಟ ಸಿ....

‘ಬೌಲರ್‌ಗಳು ಹೊಸ ಕೌಶಲ್ಯ ಬೆಳೆಸಿಕೊಳ್ಳಬೇಕು’: ಭಾರೀ ಸೋಲಿನ ಬಳಿಕ ರಾಜಸ್ಥಾನ್ ಬೌಲಿಂಗ್ ಕೋಚ್ ಶೇನ್ ಬಾಂಡ್

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ...

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಜಯ್‌ಗೆ ಕಮಲ್ ಹಾಸನ್ ಅಭಿನಂದನೆ

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಸಿ. ಜೋಸೆಫ್ ವಿಜಯ್...

ಸಚಿವ ಡಿ. ಸುಧಾಕರ್ ನಿಧನ ಅತ್ಯಂತ ನೋವಿನ ಕ್ಷಣ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆ ಮತ್ತು ಅಂಕಿಅಂಶ ಸಚಿವ ಡಿ. ಸುಧಾಕರ್...

Copying is disabled on Udupi Digital News.