ಧರ್ಮಶಾಲಾ: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ 2026 ಕ್ವಾಲಿಫೈಯರ್-1 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ಗೆ ಲಗ್ಗೆಯಿಟ್ಟಿದೆ.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಆರ್ಸಿಬಿ ತಂಡ ನಾಯಕ ರಜತ್ ಪಾಟಿದರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ ದಾಖಲೆಯ 255 ರನ್ಗಳ ಬೃಹತ್ ಮೊತ್ತ ಪೇರಿಸಿತು.
ಆರ್ಸಿಬಿ ಪರ ನಾಯಕ ರಜತ್ ಪಾಟಿದರ್ ಕೇವಲ 33 ಎಸೆತಗಳಲ್ಲಿ ಅಜೇಯ 93 ರನ್ ಸಿಡಿಸಿ ಗುಜರಾತ್ ಬೌಲರ್ಗಳನ್ನು ಸಂಪೂರ್ಣವಾಗಿ ಕಂಗೆಡಿಸಿದರು. ವಿರಾಟ್ ಕೊಹ್ಲಿ ಹಾಗೂ ಕೃನಾಲ್ ಪಾಂಡ್ಯ ತಲಾ 43 ರನ್ಗಳ ಮಹತ್ವದ ಕೊಡುಗೆ ನೀಡಿದರು.
ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಆರಂಭದಿಂದಲೇ ಒತ್ತಡಕ್ಕೆ ಸಿಲುಕಿತು. ಆರ್ಸಿಬಿ ಬೌಲರ್ಗಳ ಶಿಸ್ತುಬದ್ಧ ದಾಳಿಗೆ ಗುಜರಾತ್ ಬ್ಯಾಟರ್ಗಳು ಉತ್ತರ ನೀಡಲು ವಿಫಲರಾದರು. ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡ ಗುಜರಾತ್ ತಂಡ ಅಲ್ಪ ಮೊತ್ತಕ್ಕೆ ಕುಸಿದು ಸೋಲೊಪ್ಪಿಕೊಂಡಿತು.
ಈ ಜಯದೊಂದಿಗೆ ಆರ್ಸಿಬಿ ಸತತ ಎರಡನೇ ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದ್ದು, ಮತ್ತೊಮ್ಮೆ ಟ್ರೋಫಿ ಎತ್ತಿಹಿಡಿಯುವ ಕನಸಿಗೆ ಇನ್ನಷ್ಟು ಹತ್ತಿರವಾಗಿದೆ.
ಇನ್ನೊಂದೆಡೆ, ಕ್ವಾಲಿಫೈಯರ್-1 ಸೋತಿದ್ದರೂ ಗುಜರಾತ್ ಟೈಟಾನ್ಸ್ಗೆ ಇನ್ನೂ ಫೈನಲ್ ಪ್ರವೇಶಿಸುವ ಅವಕಾಶ ಉಳಿದಿದೆ. ತಂಡ ಕ್ವಾಲಿಫೈಯರ್-2 ಪಂದ್ಯದಲ್ಲಿ ಸೆಣಸಲಿದ್ದು, ಅಲ್ಲಿ ಗೆದ್ದರೆ ಮತ್ತೆ ಫೈನಲ್ನಲ್ಲಿ ಆರ್ಸಿಬಿಯನ್ನು ಎದುರಿಸಲಿದೆ.




