Monday, September 14, 2026

ಭಾರತ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ಸೈರಾಜ್ ಬಹುತುಲೆ ನೇಮಕ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಮಾಜಿ ಭಾರತೀಯ ಆಲ್‌ರೌಂಡರ್ ಸೈರಾಜ್ ಬಹುತುಲೆ ಅವರನ್ನು ಭಾರತ ಪುರುಷರ ಹಿರಿಯ ರಾಷ್ಟ್ರೀಯ ಕ್ರಿಕೆಟ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಿರುವುದಾಗಿ ಘೋಷಿಸಿದೆ. ಎಲ್ಲಾ ಮಾದರಿಗಳಲ್ಲೂ ಭಾರತದ ಮುಂದಿನ ತಲೆಮಾರಿನ ಸ್ಪಿನ್ನರ್‌ಗಳಿಗೆ ಅವರು ಮಾರ್ಗದರ್ಶನ ನೀಡಲಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಸಿಸಿಐ,
“ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ಪುರುಷರ ಹಿರಿಯ ರಾಷ್ಟ್ರೀಯ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ಶ್ರೀ ಸೈರಾಜ್ ಬಹುತುಲೆ ಅವರ ನೇಮಕವನ್ನು ಘೋಷಿಸಲು ಸಂತೋಷಪಡುತ್ತದೆ,” ಎಂದು ತಿಳಿಸಿದೆ.

ಭಾರತ ಪರ ಎರಡು ಟೆಸ್ಟ್ ಹಾಗೂ ಎಂಟು ಏಕದಿನ ಪಂದ್ಯಗಳನ್ನು ಆಡಿರುವ ಬಹುತುಲೆ, ದೇಶೀಯ ಕ್ರಿಕೆಟ್, ವಯೋಮಿತಿ ತಂಡಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಕೋಚಿಂಗ್ ಅನುಭವ ಗಳಿಸಿರುವ ಬಳಿಕ ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಮುಂಬೈ ಮೂಲದ ಈ ಮಾಜಿ ಆಟಗಾರ ಸುಮಾರು ಎರಡು ದಶಕಗಳ ಕಾಲ ಪ್ರಥಮ ದರ್ಜೆ ಕ್ರಿಕೆಟ್ ಆಡಿದ್ದು, 6,176 ರನ್ ಗಳಿಸುವ ಜೊತೆಗೆ 630 ವಿಕೆಟ್ ಕಬಳಿಸಿ ದೇಶೀಯ ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದರು.

ತಮ್ಮ ನೇಮಕದ ಕುರಿತು ಪ್ರತಿಕ್ರಿಯಿಸಿದ ಬಹುತುಲೆ,
“ಭಾರತ ಪುರುಷರ ಕ್ರಿಕೆಟ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿರುವುದು ನನಗೆ ಅತ್ಯಂತ ಗೌರವದ ಸಂಗತಿ. ಆಟಗಾರನಾಗಿ ಭಾರತವನ್ನು ಪ್ರತಿನಿಧಿಸುವುದು ಹೆಮ್ಮೆಯ ವಿಷಯವಾಗಿತ್ತು. ಈಗ ಮತ್ತೊಮ್ಮೆ ಕೋಚ್ ಆಗಿ ಭಾರತೀಯ ಕ್ರಿಕೆಟ್‌ಗೆ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ವಿಶೇಷ ಸಂತೋಷ ತಂದಿದೆ. ಆಟಗಾರರೊಂದಿಗೆ ಕೆಲಸ ಮಾಡಿ, ಎಲ್ಲಾ ಮಾದರಿಗಳಲ್ಲೂ ತಂಡದ ಶ್ರೇಷ್ಠತೆಯ ಗುರಿ ಸಾಧನೆಗೆ ನನ್ನ ಕೊಡುಗೆ ನೀಡಲು ಎದುರು ನೋಡುತ್ತಿದ್ದೇನೆ,” ಎಂದು ಹೇಳಿದರು.

ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ ಬಳಿಕ ಬಹುತುಲೆ ಭಾರತೀಯ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತ ಕೋಚ್‌ಗಳಲ್ಲಿ ಒಬ್ಬರಾಗಿ ಬೆಳೆದಿದ್ದಾರೆ. ಅವರು ವಿದರ್ಭ, ಕೇರಳ, ಗುಜರಾತ್ ಹಾಗೂ ಬಂಗಾಳ ತಂಡಗಳ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಇದರ ಜೊತೆಗೆ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಸ್ಪಿನ್ ಬೌಲಿಂಗ್ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಯುವ ಪ್ರತಿಭೆಗಳನ್ನು ಬೆಳೆಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. 2022ರ ಐಸಿಸಿ ಅಂಡರ್-19 ವಿಶ್ವಕಪ್ ಗೆದ್ದ ಭಾರತೀಯ ತಂಡದ ಬೌಲಿಂಗ್ ಕೋಚ್ ಆಗಿದ್ದ ಅವರು, 2024ರ ಆವೃತ್ತಿಯಲ್ಲೂ ಕೋಚಿಂಗ್ ಸಿಬ್ಬಂದಿಯ ಭಾಗವಾಗಿದ್ದರು.

ಭಾರತ ‘ಎ’ ತಂಡ ಹಾಗೂ ಹಿರಿಯ ರಾಷ್ಟ್ರೀಯ ತಂಡದೊಂದಿಗೆ ವಿಶೇಷ ಬೌಲಿಂಗ್ ಕೋಚ್ ಆಗಿ ಹಲವು ಬಾರಿ ಕೆಲಸ ಮಾಡಿರುವ ಬಹುತುಲೆ, 2021ರಿಂದ 2024ರವರೆಗೆ ಬಿಸಿಸಿಐ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಈಗ ಸೆಂಟರ್ ಆಫ್ ಎಕ್ಸಲೆನ್ಸ್) ಯಲ್ಲಿ ಕೋಚಿಂಗ್ ಸಿಬ್ಬಂದಿಯ ಪ್ರಮುಖ ಸದಸ್ಯರಾಗಿದ್ದು, ಉದಯೋನ್ಮುಖ ಪ್ರತಿಭೆಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

Copying is disabled on Udupi Digital News.