ಹೈದರಾಬಾದ್: ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಹೈದರಾಬಾದ್ನಿಂದ ವಿಜಯವಾಡ ಮಾರ್ಗವಾಗಿ ಏಲೂರು ಕಡೆಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಮುಂಜಾನೆ 4:30ರ ಸುಮಾರಿಗೆ ಕಂಟೈನರ್ ಟ್ರಕ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯವಾಡದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಗಾಯಗೊಂಡ ಕನಿಷ್ಠ 12 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಸ್ ಢಿಕ್ಕಿ ಹೊಡೆಯುವ ಮುನ್ನವೇ ಟ್ರಕ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ. ಅಪಘಾತ ಸಂಭವಿಸಿದ ವೇಳೆ ಬಸ್ನಲ್ಲಿ ಒಟ್ಟು 42 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಹಾಗೂ ಉನ್ನತ ಮಟ್ಟದ ವೈದ್ಯಕೀಯ ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.




