ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ ಮರುಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದು ತಾಯಿಯೊಬ್ಬರು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, 10ನೇ ತರಗತಿ ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಶಾಲೆಯಲ್ಲಿ ಜಗಳ ನಡೆದಿತ್ತು. ಬಳಿಕ ಇಬ್ಬರೂ ಶಾಲೆಯ ಹೊರಗೆ ಹೋಗಿ ಪರಸ್ಪರ ಹಲ್ಲೆ ನಡೆಸಿದ್ದು, ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಘಟನೆಯ ನಂತರ ಎರಡೂ ಕುಟುಂಬಗಳು ಮಾತುಕತೆ ನಡೆಸಿ ರಾಜಿ ಮಾಡಿಕೊಂಡಿದ್ದವು. ಅಲ್ಲದೆ, 10ನೇ ತರಗತಿ ವಿದ್ಯಾರ್ಥಿಯ ತಾಯಿ ಸುಮಿತ್ರಾ ಅವರು ವೈದ್ಯಕೀಯ ವೆಚ್ಚವನ್ನೂ ಭರಿಸಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಆದರೆ ಆಸ್ಪತ್ರೆಯಿಂದ ಘಟನೆ ಕುರಿತು ಮಾಹಿತಿ ಪಡೆದ ಶಾಲಾ ಆಡಳಿತ ಮಂಡಳಿ ಕ್ರಮವನ್ನು ಕೇವಲ 10ನೇ ತರಗತಿ ವಿದ್ಯಾರ್ಥಿಯ ವಿರುದ್ಧವೇ ಕೈಗೊಂಡು ಆತನನ್ನು ಅಮಾನತುಗೊಳಿಸಿದೆ ಎಂದು ಕುಟುಂಬ ಆರೋಪಿಸಿದೆ.
ಇದಲ್ಲದೆ, ಎರಡು ವಾರಗಳಿಗೂ ಹೆಚ್ಚು ಕಾಲ ವಿದ್ಯಾರ್ಥಿಗೆ ಶಾಲೆಗೆ ಮರಳಲು ಅವಕಾಶ ನೀಡದೇ, ಆತನ ವಿರುದ್ಧ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬುದನ್ನು ದೃಢೀಕರಿಸುವ ಪ್ರಮಾಣಪತ್ರ ತರಬೇಕೆಂದು ಶಾಲೆ ಒತ್ತಾಯಿಸಿದೆ ಎಂದು ಕುಟುಂಬದವರು ಹೇಳಿದ್ದಾರೆ.
ಕುಟುಂಬದ ಮನವಿಯ ಮೇರೆಗೆ ಭಾರತಿನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿ, ವಿದ್ಯಾರ್ಥಿ ಅಪ್ರಾಪ್ತನಾಗಿದ್ದು ಆತನ ವಿರುದ್ಧ ಯಾವುದೇ ಕ್ರಿಮಿನಲ್ ದಾಖಲೆ ಇಲ್ಲ ಎಂದು ಸ್ಪಷ್ಟಪಡಿಸಿ, ಮತ್ತೆ ತರಗತಿಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಬಳಿಕ ಮಗನಿಗೆ ಮರುಪ್ರವೇಶ ನೀಡುವಂತೆ ಕೋರಿ ಸುಮಿತ್ರಾ ಅವರು ತಮ್ಮ ಪತಿಯೊಂದಿಗೆ ಸೋಮವಾರ ಶಾಲೆಗೆ ತೆರಳಿದ್ದರು. ಆದರೆ ಶಾಲಾ ಆಡಳಿತ ಮಂಡಳಿಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರಕಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇದರಿಂದ ಮನನೊಂದ ಸುಮಿತ್ರಾ ಅವರು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಯಿತು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಿಚ್ಮಂಡ್ ರಸ್ತೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.




