ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಸಂಭ್ರಮಾಚರಣೆ ಜೋರಾಯಿತು.
ಗುರುವಾರ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಮಹತ್ವದ ಉಪಾಹಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ ಬಳಿಕ, ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸದ ಎದುರು ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದರು.
ಬೆಂಬಲಿಗರು ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಊಹಾಪೋಹಗಳ ನಡುವೆ ಈ ಸಂಭ್ರಮ ಮತ್ತಷ್ಟು ಹೆಚ್ಚಾಯಿತು.
ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಯಿತು.
ಮೂಲಗಳ ಪ್ರಕಾರ, ಸಚಿವ ಸಂಪುಟದ ಸಹೋದ್ಯೋಗಿಗಳ ಎದುರು ರಾಜೀನಾಮೆ ಘೋಷಿಸುವ ವೇಳೆ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಸವಾಲುಗಳು ಮತ್ತು ಮುಂದಿನ ದಿನಗಳಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದುವರಿಸುವ ಅಗತ್ಯತೆಯ ಕುರಿತು ಮಾತನಾಡಿದರು.
ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಾಗಿ ಸಚಿವರಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ ಎನ್ನಲಾಗಿದೆ. ಈ ಘೋಷಣೆಯ ಬಳಿಕ ಸಚಿವ ಸಂಪುಟದ ಸದಸ್ಯರು ಸಹ ಒಪ್ಪಿಗೆ ಸೂಚಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ, ರಾಜ್ಯದ ಜನತೆಗೆ ಉತ್ತಮ ಆಡಳಿತ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಮುಂದುವರಿಸಲು ತಮ್ಮ ಸಹೋದ್ಯೋಗಿ ಸಚಿವರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸಭೆಯ ವೇಳೆ ಸಿದ್ದರಾಮಯ್ಯ ಶಾಂತವಾಗಿಯೇ ತಮ್ಮ ನಿರ್ಧಾರ ಪ್ರಕಟಿಸಿದರೂ, ಭಾಷಣದ ಅಂತ್ಯದಲ್ಲಿ ಭಾವುಕರಾದರು ಎಂದು ಮೂಲಗಳು ತಿಳಿಸಿವೆ. “ನಾನು ಮಾಡಿದ ಕೆಲಸದಿಂದ ತೃಪ್ತನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಆಪ್ತ ಸಚಿವರಾದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವರು ಸಭೆಯ ವೇಳೆ ಭಾವುಕರಾದರು ಎಂದು ತಿಳಿದುಬಂದಿದೆ.
ಸಭೆಯ ಬಳಿಕ ಡಿ.ಕೆ. ಶಿವಕುಮಾರ್ ತಮ್ಮ ನಿವಾಸಕ್ಕೆ ತೆರಳಿದರು. ನಂತರ ಅವರು ನೊಣವಿನಕೆರೆ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದು, ಪ್ರಮಾಣವಚನ ಸಮಾರಂಭಕ್ಕೆ ಶುಭ ಮುಹೂರ್ತದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಭೇಟಿ ವೇಳೆ ಪುತ್ರಿಯೂ ಅವರೊಂದಿಗೆ ಇದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ಲೋಕಭವನಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಅಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕಟ್ಟುನಿಟ್ಟಿನ ಭದ್ರತಾ ಕ್ರಮಗಳೊಂದಿಗೆ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ.
ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ವೈಯಕ್ತಿಕ ಕಾರಣದಿಂದ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಹಿನ್ನೆಲೆಯಲ್ಲಿ, ಲೋಕಭವನ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಕಚೇರಿಯ ಪ್ರಕಟಣೆಯ ಪ್ರಕಾರ, “ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದು, ನಂತರ ಮಧ್ಯಾಹ್ನ 3 ಗಂಟೆಗೆ ತಮ್ಮ ಮತ್ತೊಂದು ಅಧಿಕೃತ ನಿವಾಸ ‘ಕೃಷ್ಣ’ದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ” ಎಂದು ತಿಳಿಸಲಾಗಿದೆ.
ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, “ಮುಖ್ಯಮಂತ್ರಿ ರಾಜಭವನಕ್ಕೆ ತೆರಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರನ್ನು ಹೊಸ ಮುಖ್ಯಮಂತ್ರಿಯಾಗಿ ಘೋಷಿಸಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.




