ಬೆಂಗಳೂರು,: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ನಗರದ ಗಾಂಧಿನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ ಸಂಕಷ್ಟವನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದರು.
“ಎಲ್ಲಾ ವಸ್ತುಗಳ ಬೆಲೆ ಆಕಾಶಕ್ಕೇರಿದೆ. ಆದರೆ ಜನರ ಆದಾಯ ಮಾತ್ರ ಕುಸಿದಿದೆ. ಈ ಬೆಲೆ ಏರಿಕೆಗೆ ಹೊಣೆ ಯಾರು?” ಎಂದು ಪ್ರಶ್ನಿಸಿದರು.
ವಾಣಿಜ್ಯ ಸಿಲಿಂಡರ್ ದರ ಏರಿಕೆಯ ಪರಿಣಾಮ ನೇರವಾಗಿ ಜನರ ಮೇಲೆ ಬೀಳುತ್ತಿದೆ. ಅನೇಕ ಹೋಟೆಲ್ಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
“ಜನರ ಮೇಲಿನ ಹೊರೆ ಕಡಿಮೆ ಮಾಡಿ, ಬೆಲೆ ಏರಿಕೆಯನ್ನು ನಿಯಂತ್ರಿಸುವ ಕ್ರಮ ಕೈಗೊಳ್ಳಬೇಕು. ಜನರು ನೆಮ್ಮದಿಯಿಂದ ಬದುಕುವಂತಾಗಬೇಕು,” ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
ಪ್ರಸ್ತುತ ಯುದ್ಧ ಪರಿಸ್ಥಿತಿಯಲ್ಲಿ ಮಿತ್ರ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಶಿವಕುಮಾರ್ ಅಭಿಪ್ರಾಯಪಟ್ಟರು.
“ಹಲವು ದೇಶಗಳು ಭಾರತಕ್ಕೆ ಬೆಂಬಲ ಸೂಚಿಸಿವೆ. ನಮ್ಮ ವಿದೇಶಾಂಗ ನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು,” ಎಂದು ಹೇಳಿದರು.
ಅಲ್ಪಸಂಖ್ಯಾತರ ಅನುದಾನ ವಿಚಾರಕ್ಕೆ ಪ್ರತಿಕ್ರಿಯೆ
ಅಲ್ಪಸಂಖ್ಯಾತರ ಪ್ರದೇಶ ಅಭಿವೃದ್ಧಿಗೆ ₹600 ಕೋಟಿ ಅನುದಾನ ಮಂಜೂರಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ₹18 ಸಾವಿರ ಕೋಟಿ ವೆಚ್ಚದಲ್ಲಿ ಬಿಡದಿ ಬಳಿ ಸ್ಯಾಟಲೈಟ್ ಟೌನ್ಶಿಪ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅದನ್ನು ಬಿಟ್ಟು ಅಲ್ಪಸಂಖ್ಯಾತರ ಅನುದಾನದ ಬಗ್ಗೆ ಮಾತ್ರ ಯಾಕೆ ಮಾತನಾಡುತ್ತೀರಿ?” ಎಂದು ಪ್ರಶ್ನಿಸಿದರು.




