ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಸಂಭವಿಸಿದೆ.
ನೀರು ಪಾಲಾದ ಯುವಕರನ್ನು ಅಭಿಷೇಕ್ (27) ಹಾಗೂ ಯೋಗೀಶ್ (17) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಡಗು ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಮೃತ ಅಭಿಷೇಕ್ ಅವರ ಅಕ್ಕ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.




