ಖಾತೆ ಮಾಡಿಕೊಡುವುದಕ್ಕಾಗಿ ₹10.50 ಲಕ್ಷ ಲಂಚಕ್ಕೆ ಬೇಡಿಕೆ; ಮೊದಲ ಕಂತಿನ ₹5 ಲಕ್ಷ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ದಾಳಿ – ಆಪ್ತ ಸಹಾಯಕ ಸೇರಿ ಬಂಧನ.
ಮೈಸೂರು/ಹುಣಸೂರು: ಹುಣಸೂರು ಉಪವಿಭಾಗಾಧಿಕಾರಿ (ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್) ಕಾವ್ಯರಾಣಿ ಅವರು ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.
ಎಚ್.ಡಿ. ಕೋಟೆ ತಾಲೂಕಿನ ಸರ್ವೇ ನಂಬರ್ 17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದಂತೆ ಡಾ. ರೂಪಾ ಅವರಿಗೆ ಖಾತೆ ಮಾಡಿಕೊಡಲು ಕಾವ್ಯರಾಣಿ ₹10 ಲಕ್ಷ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಒಪ್ಪಂದದಂತೆ ಮೊದಲ ಕಂತಿನ ₹5 ಲಕ್ಷವನ್ನು ಸ್ವೀಕರಿಸಿದ ಬಳಿಕ, ಎರಡನೇ ಕಂತಿನ ಹಣ ಪಡೆಯಲು ತಮ್ಮ ನಿವಾಸಕ್ಕೆ ಬರಲು ಸೂಚಿಸಿದ್ದರು. ಈ ವೇಳೆ ಮನೆಯಲ್ಲೇ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾವ್ಯರಾಣಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಕಾವ್ಯರಾಣಿ ಅವರ ಆಪ್ತ ಸಹಾಯಕ ಶಿವಕುಮಾರ್ ಅವರನ್ನು ಸಹ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ಹಾಗೂ ಮಡಿಕೇರಿ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಲೋಕಾಯುಕ್ತ ಎಸ್ಪಿ ಉದೇಶ್, ಕಾವ್ಯರಾಣಿ ಮತ್ತು ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.




