ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಕರ್ನಾಟಕಕ್ಕೆ ಭೇಟಿ ನೀಡಿ, ಪೂಜ್ಯ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾದ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ ಹಾಗೂ ಒಂದು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಧಾನಮಂತ್ರಿ ಅವರು ಬೆಳಗ್ಗೆ ಸುಮಾರು 11 ಗಂಟೆಗೆ ಮಂಡ್ಯ ಜಿಲ್ಲೆಯ ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ನಿರ್ಮಿಸಲಾದ “ಶ್ರೀ ಗುರು ಭೈರವೈಕ್ಯ ಮಂದಿರ”ವನ್ನು ಉದ್ಘಾಟಿಸಲಿದ್ದು, ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಭೇಟಿ ಸಂದರ್ಭದಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರೊಂದಿಗೆ “ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನ ಸ್ತೋತ್ರಂ” ಎಂಬ ಪುಸ್ತಕವನ್ನು ಸಂಯುಕ್ತವಾಗಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶ್ರೀ ಗುರು ಭೈರವೈಕ್ಯ ಮಂದಿರವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧಿಪತಿಯಾಗಿದ್ದ ಪೂಜ್ಯ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರಿಗೆ ಸಮರ್ಪಿತ ಸ್ಮಾರಕವಾಗಿದೆ.
ದ್ರಾವಿಡ ಶೈಲಿಯ ಸಾಂಪ್ರದಾಯಿಕ ವಾಸ್ತುಶಿಲ್ಪದಲ್ಲಿ ನಿರ್ಮಿಸಲಾದ ಈ ಮಂದಿರವು ಮಹಾಸ್ವಾಮೀಜಿಗಳ ಜೀವನ ಮತ್ತು ಸಾಧನೆಗಳಿಗೆ ಶಾಶ್ವತ ಸ್ಮರಣೆಯಾಗಿದೆ.
ಈ ಮಂದಿರವು ಕೇವಲ ಭಕ್ತಿಪೂರ್ಣ ಸ್ಥಳವಾಗಿಯೇ ಅಲ್ಲದೆ, ಮುಂದಿನ ಪೀಳಿಗೆಗಳಿಗೆ ಪ್ರೇರಣೆಯ ಕೇಂದ್ರವಾಗಿಯೂ ರೂಪುಗೊಳ್ಳಲಿದೆ ಎಂದು ತಿಳಿಸಲಾಗಿದೆ.
ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ತಮ್ಮ ಜೀವನವಿಡೀ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅನೇಕ ಶಿಕ್ಷಣ ಸಂಸ್ಥೆಗಳು ಹಾಗೂ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿದ್ದರು. ಸಮಾಜ ಸೇವೆಯೇ ಶ್ರೇಷ್ಠ ಪೂಜೆ ಎಂಬ ನಂಬಿಕೆಯನ್ನು ಅವರು ಹೊಂದಿದ್ದು, ಜಾತಿ, ಧರ್ಮ ಹಾಗೂ ಪ್ರದೇಶದ ಭೇದಗಳನ್ನು ಮೀರಿ ಲಕ್ಷಾಂತರ ಮಂದಿಗೆ ಪ್ರೇರಣೆಯಾಗಿದ್ದಾರೆ.




